ಈ ಬ್ಲಾಗ್ ಅನ್ನು ಹುಡುಕಿ
ಶುಕ್ರವಾರ, ಜುಲೈ 21, 2023
ravinota: ಅಂತರಾತ್ಮನ ದನಿಗೆ.......
ravinota: ಅಂತರಾತ್ಮನ ದನಿಗೆ.......: ಕಳೆದ ಸುಮಾರು ೮-೯ ವರ್ಷಗಳಿಂದ ಪೂಜ್ಯ ಶ್ರೀ ಡಿ. ವಿ. ಜಿ. ವಿರಚಿತ "ಮಂಕುತಿಮ್ಮನ ಕಗ್ಗ " ನನಗೆ ಗುರುಸ್ಥಾನದಲ್ಲಿದ್ದು ದಾರಿ ತೋರುತ್ತಿರುವ ಪುಸ್...
ಸೋಮವಾರ, ಜನವರಿ 27, 2020
ಬರ-ನೆರೆ-ಬರೆ
ಮೃಗಶಿರೆಯ ಮಳೆಯ ನೆಚ್ಚಿ ಹೊಲವನುತ್ತಿ ಬೀಜ ಬಿತ್ತಿ
ಮುಗಿಲ ನೋಡೆ ಗಗನದೊಡಲು ಬಿಳಿಯ ಮೋಡ ಹಡೆದಿದೆ
ಮುಗಿಲ ನೋಡೆ ಗಗನದೊಡಲು ಬಿಳಿಯ ಮೋಡ ಹಡೆದಿದೆ
ಉರಿವ ಸೂರ್ಯ ಕಾದ ನೆಲವು ಹುರಿದು ಹೋದ ಎಲ್ಲ ಬೀಜ
ಬರಿಯ ಕನಸು ಸುಖದ ಬದುಕ ಬೆಳಕು ಕಾಣದಾಗಿದೆ //
ಬರಿಯ ಕನಸು ಸುಖದ ಬದುಕ ಬೆಳಕು ಕಾಣದಾಗಿದೆ //
ಕಮರಲಿಲ್ಲ ಪೂರ್ತಿ ಕನಸು ನಡುವೆ ಮಳೆಯು ಹನಿದಿದೆ
ನಮನ ನಿನಗೆ ವರುಣದೇವ ಇಳೆಯು ಗರ್ಭ ತಳೆದಿದೆ
ಮೊಳಕೆ ಚಿಗುರಿ ನಗುತ ನಿಂತು ಮುದದಿ ಮುಗಿಲ ನೋಡಿದೆ
ಸುಳಿಯದಾದೆ ಮತ್ತೆ ನೀನು ಚಿಗುರ ನವಿರು ಮುದುಡಿದೆ //
ಮನ್ನಿಸೆಲ್ಲ ನಮ್ಮ ಲೋಪ ಹನಿಸಿ ತಣಿಸು ನೆಲದ ತಾಪ
ನಿನ್ನೊಕ್ಕಲ ಬಾಳನುಳಿಸು ಇದುವೆ ಕರುಳ ಪ್ರಾರ್ಥನೆ
ದೇವ ವರುಣ ತೋರೆ ಕರುಣ ಕರಿಯ ಮೋಡ ಸಾಲು ಸಾಲು
ಅವತರಿಸಿದ ಭಾಗೀರಥಿ ಸಲಿಲ ಜಲಲ ಜಲಲಾ //
ಅವತರಿಸಿದ ಭಾಗೀರಥಿ ಸಲಿಲ ಜಲಲ ಜಲಲಾ //
ಬಸವಳಿದಿಹ ನೆಲ ತಣಿಯಿತು ತೃಷೆ ಹಿಂಗಿದ ಬೆಳೆ ಬಳುಕಿತು
ಕಸುವು ಪಡೆಯೆ ಮುಸಲಧಾರೆ ಕೆರೆಯ ಕೋಡಿ ತುಳುಕಿತು
ನಿಮ್ಮ ಕರುಣಕೆಮ್ಮ ನಮನ ಹಿಂದೆ ಸರಿದು ಬಿಸಿಲ ಕಳಿಸು
ಕಮ್ಮಿಯಾಗಲಿಲ್ಲ ರಭಸ ನಿಲ್ಲದ ಜಲಧಾರಾ //
ಮಳೆ ಸುರಿಯಿತು ಅನವರತವು ಸೊಕ್ಕಿ ಹರಿದವೆಲ್ಲ ಹಳ್ಳ
ಗೆಳೆಯ ಕೇಳು ಹೊಲವ ದಾಟಿ ಕದವತಟ್ಟಿತಗಸೆ ಮೀರಿ
ಕಾಲ ಕೆಳಗೆ ಮನೆಯ ಒಳಗೆ ನುಸುಳಿ ಸಾಗಿ ಬರಲು ಗಂಗೆ
ಮೇಲೆ ಸರಿಸಿ ಎಲ್ಲ ದಿನಸಿ ಹೊರಟ ಗಟ್ಟಿ ನೆಲೆಯೆಡೆ //
ಒಡವೆ ವಸ್ತ್ರ ಜಾನುವಾರು ಬದುಕಿನೆಲ್ಲ ಮೂಲದ್ರವ್ಯ
ಬಿಡಲೊಲ್ಲದೆ ಹಿಂದೆ ಉಳಿದು ಮೇಲೇರಲು ಮತ್ತೆ ನೀರು
ಎಲ್ಲ ತೊರೆದು ಮಾಡನೇರೆ ಸುತ್ತ ಕರಿಯ ಜಲದ ರಾಶಿ
ಝಲ್ಲೆನಿಸಿ ಬೊಬ್ಬೆ ಹೊಡೆಯೆ ಬಂದ ದೋಣಿ ಏರಿದ //
ಶಿಬಿರ ಸೇರೆ ಅಲ್ಲಿ ನೋಡು ಊರಗೌಡ್ರು ಅರ್ಚಕಯ್ಯ
ಸಾಬ ಸಿಂಪಿ ಬೇಡ ಗೊಲ್ಲ ಕೊನೆಯ ಬೀದಿ ಸಮಗಾರನು
ಎಲ್ಲ ಸೇರಿ ಒಂದೆ ಸಾಲು ಬೆಳಗಿನ ಉಪಹಾರಕೆ
ಬೆಲ್ಲ ಬೇವು ಭೇದವಳಿಯಿತೆಲ್ಲ ಒಂದೆ ಪೆಟ್ಟಿಗೆ //
ವಾರ ಕಳೆದು ನೀರು ಸರಿಯಿತದರ ಮೂಲ ಹರಿವಿನೆಡೆಗೆ
ಬಿರಬಿರನೇ ಊರಿಗೋಡಿ ನೋಡಲಲ್ಲಿ ಏನುಳಿದಿದೆ
ಎಲ್ಲ ಗುಡಿಸಿ ಕೆಸರ ಹೊದಿಸಿ ಕೆಲಸ ಮುಗಿಸಿ ಬಿಟ್ಟೋಡಿದೆ
ಎಲ್ಲಿ ಮನೆಯು ಮಣ್ಣ ರಾಶಿ ಎಲ್ಲ ಕೊಳೆತು ಕಳಿತಿದೆ //
ಕಣ್ಣಿ ಬಿಚ್ಚದಿದ್ದ ಎಮ್ಮೆ ಎತ್ತು ಕೋಳಿ ಆಡು ಮೇಕೆ
ತಣ್ಣಗಲ್ಲೆ ಜೀವ ತೊರೆದು ದೇಹ ಉಬ್ಬಿ ಕೊಳೆಯುತಿರಲು
ಮರೆವುದ್ಹೇಗೆ ಅವರ ಸಂಗ ಕಣ್ಣ ನೋಟ ಮೂಕಪ್ರೇಮ
ಕೊರಗು ಹೃದಯ ಹಿಂಡುತಿಹುದು ತಾವೆ ಕೊಟ್ಟ ನರಳಿಕೆ //
ಏಕೆ ಕುಣಿವೆ ಕ್ರೂರ ವಿಧಿಯೆ ಎಲ್ಲ ಹೊಸಕಿ ಹಾಕಿ ಹೋದೆ
ನೆಕ್ಕಲಿನ್ನು ಉಳಿದುದೇನು ಕಣ್ಣ ನೀರು ಹಳೆಯ ನೆನಪು
ಪಾಪ ಯಾರು ಮಾಡಿದರೋ ತಾಪ ನಮ್ಮ ಹಣೆಯ ಬರಹ
ಒಪ್ಪ ಮಾಡಿ ಕೊಳ್ಳಲೀಗ ಶಿವನ ಕರುಣೆ ಬೇಕಿದೆ //
ಪ್ರಳಯ ಮಳೆಯ ವರ್ತಮಾನ ನಾಡತುಂಬ ಹರಡಲಾಗ
ಹಳೆಯ ಗೆಳೆಯರೆಂಬ ರೀತಿ ಜಗದ ಹೃದಯ ಮಿಡಿಯಿತಲ್ಲ
ರೊಟ್ಟಿ ಅಕ್ಕಿ ಧವಸ ಧಾನ್ಯ ಬಟ್ಟೆ ಕೌದಿ ಗುಳಿಗೆ ಮದ್ದು
ಕೊಟ್ಟರಲ್ಲ ಪಾಟಿ ಪೆನ್ನು ದಿನಬಳಕೆಯ ಪರಿಕರ //
ಹರಿದು ಬರಲು ಕರುಣೆ ಕೊಡುಗೆ ಚಿಗುರಿ ನಿಂತ ದುರುಳ ಕೂಟ
ಮುರಿದ ಮನೆಯೆ ತಮ್ಮದೆಂದು ಬಾಚಿಕೊಂಡ ಖಳರ ಹೂಟ
ದೀನ ದಲಿತ ಮುದುಕ ಮುದುಕಿ ಹಿಂದೆ ಉಳಿದು ಅಳುತ ನಿಲಲು
ಹೀನ ಬುದ್ಧಿ ನೆರೆಯ ಕೆಸರಿನಲ್ಲು ವೋಟು ಗುಣಿಸಿದೆ //
ಮನೆ ಅಳಿಯಿತು ಬೆಳೆ ಹೋಯಿತು ಹೊಲದಿ ರಾಡಿ ಹರಡಿ ಮಲೆತು
ಜಾನುವಾರು ಕೊಚ್ಚಿ ಹೋಗಿ ಕೃಷಿಯ ನೆಚ್ಚು ಅಳಿದು ನಲುಗಿ
ಹಳ್ಳಿ - ಕೇರಿ ಜನರ ಬದುಕು ಹಸನು ಬಾಳು ಹಿಪ್ಪೆಯಾಯ್ತು
ಕೊಳ್ಳೆ ಹೊಡೆದ ಗುಳ್ಳೆ ನರಿಯು ಮತ್ತೆ ನೆರೆಯ ಕರೆದಿದೆ //
- ರವೀಂದ್ರ ಭಟ್, ದೊಡ್ನಳ್ಳಿ.
(2019ರ ಅಗಸ್ಟ್ ತಿಂಗಳಲ್ಲಿ ಉತ್ತರ ಕರ್ನಾಟಕದಲ್ಲಿ ಬಂದ ಭಾರಿ ಮಳೆ ಮತ್ತು ನಂತರದ ಪ್ರವಾಹ ತಂದಿತ್ತ
ದುರಂತಗಳನ್ನು ವೀಕ್ಷಿಸಿ ಮನಕಲಕಿ ಬರೆದಿದ್ದು)
ಗುರುವಾರ, ಜನವರಿ 2, 2020
ಹೀಗೇಕೆ ನಾವು ಭಾರತೀಯರು
ಸ್ವಾರ್ಥವೆಮ್ಮ ಪರಂಪರೆಯು
ಇದುವೆ ನಮ್ಮ ಸಂಸ್ಕೃತಿ
ಲಂಚ ಎಮಗೆ ವರ್ಜ್ಯವಲ್ಲ
ಎಲ್ಲೆಡೆಯಿದೆ ಮಾನ್ಯತೆ
ಲಂಚಕೋರ ಪರಮಶೂರ
ಅಪ್ಪಿಕೊಳುವೆವವನನು
ತಪ್ಪು ತಿದ್ದುವಲ್ಲಿ ಎಮಗೆ
ಇಲ್ಲ ಎನಿತು ಆಸ್ತೆಯು
ಕಾಣಿಕೆಯನು ಅಳತೆ ಮೀರಿ
ಸಲ್ಲಿಸುವರು ಗುಡಿಯಲಿ
ಯೋಗ್ಯತೆಯದು ಇರಲಿ ಬಿಡಲಿ
ಬೇಡಿ ಫಲವ ಶೀಘ್ರದಿ
ಭಕ್ತಿ ಭಾವ ಏನು ಇಲ್ಲ
ಕೊಡುಕೊಳ್ಳುವ ಪರಿಯಿದು
ಹೊರಗೆ ಬಂದು ನೋಡಿರಯ್ಯ
ಇದಕ್ಕೆ 'ಲಂಚ' ಎನುವರು
ತಿರುಗಿನೋಡು ನಮ್ಮ ಚರಿತೆ
ಲಂಚ ಯುದ್ಧ ಗೆದ್ದಿದೆ
ಮೀರ್ ಜಾಫರ್ ಶೆಟ್ಟಿ ಮಲ್ಲ
ಮನೆಮುರುಕರ ದಂಡಿದೆ
ಪಾರ್ಸಿ ಹಿಂದು ಮುಸಲ್ಮಾನ
ಬುದ್ಧ ಕ್ರೈಸ್ತ ಜೈನರು
ತಮಿಳ ತೆಲುಗ ಹಿಂದಿ ವಂಗ
ಕೇರಳಿ ಕರ್ನಾಟಕಿ
ಏಕೆ ಹೀಗೆ ಹಿಂದೆ ಸರಿಸಿ
ಮೊದಲು ಬರಲಿ ದೇಶವು
ಸೆಟೆದು ಹೇಳಿ ಎದೆಯುಬ್ಬಿಸಿ
‘ನಾವು ಭಾರತೀಯರು'
ಹಳೆಯ ಚರಿತೆ ಹೊಸಕಿ ಹಾಕಿ
ಹೊಸದೆ ದೇಶ ಕಟ್ಟುವಾ
“ಮೊದಲು ದೇಶ” ಸೂತ್ರ ಪಠಿಸಿ
ದೇಶ ಗೆಲಿಸಿ ಗೆಲ್ಲುವಾ
ದೇಶ ಗೆಲಿಸಿ ಗೆಲ್ಲುವಾ
- ರವೀಂದ್ರ ಭಟ್ ದೊಡ್ನಳ್ಳಿ
(ಜಾಲತಾಣದಲ್ಲಿ ಕಂಡ ಸಂದೇಶವೊಂದರಿಂದ ಸ್ಪೂರ್ತಿ ಪಡೆದು)
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)